ಕಾಸರಗೋಡು : ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಾರ್ಪನಡ್ಕದ ಬೆದ್ರಕೂಡ್ಲು ನಿವಾಸಿ ಸುರೇಶ್ (42) ಕೊಲೆಯಾದ ದುರ್ದೈವಿ. ಭಾನುವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯದ ವೇಳೆ ಆಟಗಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಅಲ್ಲಿಗೆ ಬಂದಿದ್ದ ಸುರೇಶ್ ಅವರಿಗೂ ಹಾಗೂ ಆರೋಪಿಗಳಿಗೂ ಗಲಾಟೆಯಾಗಿತ್ತು.
ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆರೋಪಿಗಳು, ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ಮಾರ್ಪನಡ್ಕದಲ್ಲಿ ಸುರೇಶ್ ಅವರನ್ನು ಅಡ್ಡಗಟ್ಟಿದ್ದಾರೆ. ಮೈದಾನದಲ್ಲಿ ನಡೆದಿದ್ದ ಜಗಳ ಮತ್ತೆ ಇಲ್ಲಿ ತಾರಕಕ್ಕೇರಿದೆ. ಈ ವೇಳೆ ರೊಚ್ಚಿಗೆದ್ದ ದುಷ್ಕರ್ಮಿಗಳು ಸುರೇಶ್ ಅವರಿಗೆ ಚಾಕುವಿನಿಂದ ಮನಸೋಇಚ್ಛೆ ಇರಿದು ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ರಕ್ತಸ್ರಾವಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಸುರೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ದಾರಿಯಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಈ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಕಿರಣ್ ಮತ್ತು ಅಖಿಲೇಶ್ ಎಂಬ ಇಬ್ಬರು ಆರೋಪಿಗಳ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಘಟನೆಯ ನಂತರ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದು, ಕ್ರಿಕೆಟ್ ಮೈದಾನದ ಜಗಳವೇ ಈ ಹತ್ಯೆಗೆ ಅಸಲಿ ಕಾರಣವೇ ಅಥವಾ ಬೇರೆನಾದರೂ ಹಳೆ ದ್ವೇಷವಿತ್ತೇ ಎಂಬ ನಿಟ್ಟಿನಲ್ಲಿ ತೀವ್ರ ತನಿಖೆ ಕೈಗೊಂಡಿದ್ದಾರೆ.
ಇದನ್ನು ಓದಿ : Bihar : ಪಟ್ನಾ ಪ್ಯಾಸೆಂಜರ್ ರೈಲಿನಲ್ಲಿ ಭೀಕರ ಬೆಂಕಿ; ಪ್ಲಾಟ್ಫಾರ್ಮ್ನಲ್ಲಿ ಒಂದು ಬೋಗಿ ಬೆಂಕಿಯಲ್ಲಿ ಉರಿಯುತ್ತದೆ!



