ಬೆಳ್ತಂಗಡಿ : ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯ ವೈದ್ಯರ ಘೋರ ನಿರ್ಲಕ್ಷ್ಯಕ್ಕೆ ಬೆಳ್ತಂಗಡಿಯ ವ್ಯಾಪಾರಿ ಯುವಕನೊಬ್ಬ ದಾರುಣವಾಗಿ ಬಲಿಯಾಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ಅಧಿಕೃತ ಎಫ್ಐಆರ್ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮುಹಮ್ಮದ್ ಶರೀಫ್ (35) ಮೃತಪಟ್ಟವರಾಗಿದ್ದಾರೆ. ಮೇ 14 ರಂದು ರಾತ್ರಿ ಮನೆಯಲ್ಲಿದ್ದ ವೇಳೆ ಶರೀಫ್ ಅವರ ಮೇಲೆ ಹೋರಿಯೊಂದು ಭೀಕರವಾಗಿ ಹಾಯ್ದು ಗಾಯಗೊಳಿಸಿತ್ತು. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿನ ವೈದ್ಯರು ತೀವ್ರ ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮೇ 16 ರಂದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೇ 20 ರಂದು ಮುಹಮ್ಮದ್ ಶರೀಫ್ ಕೊನೆಯುಸಿರೆಳೆದಿದ್ದಾರೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನ ಹಾಗೂ ತಪ್ಪು ಚಿಕಿತ್ಸೆಯೇ ಈ ಸಾವಿಗೆ ನೇರ ಕಾರಣ ಎಂದು ಮೃತರ ಸಹೋದರ ನಾಸಿರುದ್ದೀನ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಪೊಲೀಸರು ಯು.ಡಿ.ಆರ್: 28/2026, ಕಲಂ: 194(3) (iv) ಬಿ.ಎನ್.ಎಸ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಅರುಣ್ ಕೆ. ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯ ಚಿಕಿತ್ಸಾ ದೋಷ ಹಾಗೂ ನಿರ್ಲಕ್ಷ್ಯದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ವರದಿ ನೀಡಲು ವಿಶೇಷ ವೈದ್ಯಕೀಯ ತಂಡವನ್ನು (Medical Team) ರಚಿಸುವಂತೆ ಸಂಬಂಧಪಟ್ಟ ಇಲಾಖೆಗೆ ಕೋರಲಾಗಿದೆ. ವೈದ್ಯಕೀಯ ತಂಡದ ಅಧಿಕೃತ ವರದಿ ಬಂದ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.



