ಬಂಟ್ವಾಳ : ಮಂಗಳೂರಿನಿಂದ ಸಂಬಂಧಿಕರು ಹಾಗೂ ಸ್ನೇಹಿತರ ತಂಡವೊಂದು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿಗೆ ಸೀಮಂತ (Baby Shower) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಿನಿ ಬಸ್ನಲ್ಲಿ ತೆರಳಿತ್ತು. ಕಾರ್ಯಕ್ರಮ ಮುಗಿಸಿ ಎಲ್ಲರೂ ಅದೇ ಮಿನಿ ಬಸ್ನಲ್ಲಿ ಅತ್ಯಂತ ಸಂತೋಷದಿಂದ ಮಂಗಳೂರಿನತ್ತ ವಾಪಸ್ ಪ್ರಯಾಣಿಸುತ್ತಿದ್ದರು. ಆದರೆ ಬಸ್ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 10ನೇ ಮೈಲಿ ಪ್ರದೇಶದ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಭರದಿಂದ ಸಾಗುತ್ತಿದ್ದ ಮಿನಿ ಬಸ್ ರಸ್ತೆ ಮಧ್ಯದ ಡಿವೈಡರ್ಗೆ ಭೀಕರವಾಗಿ ಢಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲೇ ತಲೆಕೆಳಗಾಗಿ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಬಸ್ನಲ್ಲಿದ್ದ ಪ್ರಯಾಣಿಕರು ರಕ್ತದ ಮಡುವಿನಲ್ಲಿ ಬಿದ್ದು ಚೀರಾಡಿದ್ದಾರೆ.
ಈ ಘೋರ ಅಪಘಾತದಲ್ಲಿ ಒಟ್ಟು ಒಂಬತ್ತು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಗಾಯಾಳುಗಳ ಪೈಕಿ ಮಂಗಳೂರು ಮೂಲದ ವಿಕಾಸ್ ಎಂಬುವವರಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದ್ದರಿಂದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ವೈದ್ಯರು ಪ್ರಾಣ ಉಳಿಸಲು ತೀವ್ರ ಪ್ರಯತ್ನ ನಡೆಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ವಿಕಾಸ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಉಳಿದ ಎಂಟು ಮಂದಿ ಗಾಯಾಳುಗಳು ಸದ್ಯ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೀಮಂತದ ಸಡಗರದ ಮನೆ ಯುವಕನ ಸಾವಿನಿಂದಾಗಿ ಈಗ ಕಣ್ಣೀರಿನ ಸಾಗರದಲ್ಲಿ ಮುಳುಗಿದೆ. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರಿ (Traffic) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Read This : Beltangady : ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ, 23.67 ಲಕ್ಷ ಮೌಲ್ಯದ ಸೊತ್ತು ಪತ್ತೆ



