ಉಡುಪಿ : ಮೃತ ಯುವಕನನ್ನು ಸಾಗರದ ಜನ್ನತ್ ನಗರ ನಿವಾಸಿ ಬೆಟ್ಟೆ ಗಫಾರ್ ಅವರ ಪುತ್ರ, ಹೂಡೆ ಮೂಲದ ಬೆಟ್ಟೆ ಅಫ್ರಾನ್ ಎಂದು ಗುರುತಿಸಲಾಗಿದೆ. ಅಫ್ರಾನ್ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಇಂಟರ್ನ್ಶಿಪ್ ಕರ್ತವ್ಯವನ್ನು ಮುಗಿಸಿ ಉಡುಪಿಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ನಿಟ್ಟೂರು ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಅಫ್ರಾನ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರ ನೆರವಿನಿಂದ ಅವರನ್ನು ತುರ್ತು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ರವಾನಿಸಿ, ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿತ್ತು. ವೈದ್ಯರು ಸತತ ಪ್ರಯತ್ನ ನಡೆಸಿದರೂ ಕೂಡ ಗಾಯಗಳ ತೀವ್ರತೆಯಿಂದಾಗಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅಫ್ರಾನ್ ಮೃತಪಟ್ಟಿದ್ದಾರೆ. ಅಪಘಾತದ ನಿಖರ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದ್ದು, ಉಡುಪಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.