ತಿರುವನಂತಪುರಂ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಕಾರು ಹಿಂಬದಿಯಿಂದ ರಭಸವಾಗಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಎಂಟು ಮಂದಿ ಮೃತಪಟ್ಟಿರುವ ಭೀಕರ ರಸ್ತೆ ಅಪಘಾತ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸಂಭವಿಸಿದೆ.
ತ್ರಿಶೂರ್ ಸಮೀಪದ ಕೈಪಮಂಗಲಂನ ಪಣಂಬಿಕುನ್ನು ಎಂಬಲ್ಲಿ ಶುಕ್ರವಾರ ತಡರಾತ್ರಿ ಸುಮಾರು 11:40ರ ವೇಳೆಗೆ ಈ ದುರಂತ ನಡೆದಿದೆ. ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿದ್ದ ಕಾರು, ಕೇರಳದ ಪ್ರಸಿದ್ಧ ಯಾತ್ರಾಸ್ಥಳ ಗುರುವಾಯೂರಿನಿಂದ ಕೊಡುಂಗಲ್ಲೂರಿನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದೊಳಗೆ ಮೃತದೇಹಗಳು ಸಿಲುಕಿಕೊಂಡಿದ್ದವು.
ಸ್ಥಳೀಯ ನಿವಾಸಿಗಳು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ನಜ್ಜುಗುಜ್ಜಾಗಿದ್ದ ವಾಹನದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದ ಕಾಲೇಜು ವಿದ್ಯಾರ್ಥಿಗಳು ಎಂದು ಹೇಳಲಾಗಿದ್ದು, ಅವರ ನಿಖರ ಗುರುತು ಪತ್ತೆ ಹಚ್ಚಲು ಮತ್ತು ಅಪಘಾತಕ್ಕೆ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ಓದಿ : Bengaluru : ಸಾಲದ ಬಡ್ಡಿ ಕಟ್ಟಿಲ್ಲವೆಂದು ಮಹಿಳೆಯ ಅಪಹರಣ, ವಿವಸ್ತ್ರಗೊಳಿಸಿ ಹಲ್ಲೆ; ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ!