ನವದೆಹಲಿ : ನೇಪಾಳದ ರಾಜಕೀಯದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಹೊಸ ಪ್ರಧಾನಿಯಾಗಿ ಬಾಲೆನ್ ಶಾ (Balen Shah) ಪ್ರಮಾಣ ವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳನ್ನು ಕ್ರೂರವಾಗಿ ದಮನ ಮಾಡಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಓಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನೂ ಭಕ್ತಪುರದ ಅವರ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿದೆ.
ಏನಿದು ಪ್ರತಿಭಟನೆ?
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧ ಮತ್ತು ಆರ್ಥಿಕ ಸಂಕಷ್ಟದ ವಿರುದ್ಧ ನೇಪಾಳದ ಯುವಜನತೆ (Gen Z) ನಡೆಸಿದ ಭಾರಿ ಪ್ರತಿಭಟನೆಯ ವೇಳೆ ಸುಮಾರು 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ಉನ್ನತ ಮಟ್ಟದ ತನಿಖಾ ಸಮಿತಿಯು, ಅಂದಿನ ಓಲಿ ಸರ್ಕಾರವು ಪ್ರತಿಭಟನೆಯನ್ನು ಹತ್ತಿಕ್ಕಲು ಅತಿಯಾದ ಬಲಪ್ರಯೋಗ ಮಾಡಿದೆ ಮತ್ತು ಅಮಾಯಕರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವರದಿ ನೀಡಿತ್ತು. ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಈ ವರದಿಯನ್ನು ಜಾರಿಗೆ ತರಲು ಬಾಲೆನ್ ಶಾ ನಿರ್ಧರಿಸಿದ್ದಾರೆ.
ಬಂಧನದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಹೊಸ ಗೃಹ ಸಚಿವ ಸುದನ್ ಗುರುಂಗ್, “ಇದು ಯಾರ ವಿರುದ್ಧದ ಸೇಡಿನ ಕ್ರಮವಲ್ಲ, ಬದಲಾಗಿ ದೇಶದಲ್ಲಿ ನ್ಯಾಯದ ಆಡಳಿತ ಆರಂಭವಾಗಿದೆ ಎಂಬುದಕ್ಕೆ ಸಾಕ್ಷಿ” ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ಮೇಲಲ್ಲ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವುದು ನಮ್ಮ ಆದ್ಯತೆ ಎಂದು ಅವರು ಹೇಳಿದ್ದಾರೆ. ಆದರೆ, ಈ ಬಂಧನವನ್ನು ಕೆ.ಪಿ. ಶರ್ಮಾ ಓಲಿ ಅವರು ತೀವ್ರವಾಗಿ ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ.
ನೇಪಾಳದ ಇತಿಹಾಸದಲ್ಲಿಯೇ 35 ವರ್ಷದ ಬಾಲೆನ್ ಶಾ ಅವರು ಅತ್ಯಂತ ಕಿರಿಯ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ. ಓಲಿ ಅವರ ಬಂಧನದಿಂದಾಗಿ ನೇಪಾಳದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗುವ ಸಾಧ್ಯತೆಯಿದ್ದು, ಅವರ ಬೆಂಬಲಿಗರು ಪ್ರತಿಭಟನೆಗೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ. ಈ ಬೆಳವಣಿಗೆಯಿಂದಾಗಿ ನೇಪಾಳದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

