ಮಂಗಳೂರು : ಮಂಗಳೂರಿನ ಮೀನುಗಾರಿಕಾ ದಕ್ಕೆಯ ಬಳಿ ಇಂದು (ಬುಧವಾರ) ನಾಸೀರ್ ಅಲಿಯಾಸ್ ‘ದಕ್ಕೆ ನಾಸಿರ್’ ಎಂಬುವವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯ ಹಣೆ ಮತ್ತು ಶರೀರದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ನದಿಗೆ ಎಸೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ದಕ್ಕೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ನದಿಯಲ್ಲಿ ಈ ಶವ ಪತ್ತೆಯಾಗಿದೆ.
ಹಿನ್ನೆಲೆ: ಮೃತ ನಾಸೀರ್ ಮೇಲೆ ಈ ಹಿಂದೆ ಹಲವಾರು ಕಳ್ಳತನ ಮತ್ತು ದರೋಡೆ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ. ಪಾಂಡೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಎರಡನೇ ಕೊಲೆ ಪ್ರಕರಣ ಇದಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಾರ್ಚ್ 27 ರಂದು ತೊಕ್ಕೊಟ್ಟಿನಲ್ಲಿ ರೌಡಿ ಶೀಟರ್ ಆರಿಫ್ ಹುಸೇನ್ ಎಂಬಾತನನ್ನೂ ಕೂಡ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

