ಕುಂದಾಪುರ : ಕುಂದಾಪುರ ತಾಲೂಕಿನ ಬೀಜಾಡಿ ಡಿವೈಡರ್ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ನಲ್ಲಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ, ದಿವಂಗತ ಮಂಜುನಾಥ ಆಚಾರಿ ಅವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ.
ಶಾರದಾ ಅವರು ತನ್ನ ಮಗನೊಂದಿಗೆ ಸ್ಕೂಟರ್ನಲ್ಲಿ ಕೋಟೇಶ್ವರದ ಅಂಕದಕಟ್ಟೆಯಲ್ಲಿರುವ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದರು. ಸ್ಕೂಟರ್ ಬೀಜಾಡಿ ಡಿವೈಡರ್ ಬಳಿ ತಲುಪಿದಾಗ, ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸ್ಕೂಟರ್ಗೆ ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಾರದಾ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ಸ್ವರೂಪದ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಕೂಟರ್ ಚಲಾಯಿಸುತ್ತಿದ್ದ ಶಾರದಾ ಅವರ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಕಾರಿ ಗಾಯಗಳಿಲ್ಲದೆ ಬದುಕುಳಿದಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಮಾಹಿತಿ ತಿಳಿದ ಕೂಡಲೇ ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಟಿಪ್ಪರ್ ಲಾರಿ ಚಾಲಕನ ವಿರುದ್ಧ ತನಿಖೆ ಕೈಗೆತ್ತಿಕೊಂಡಿದ್ದಾರೆ.

