ಮಂಗಳೂರು: ಕಳೆದ ಶನಿವಾರ (ಏಪ್ರಿಲ್ 11) ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್ವೆಲ್ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕುಮಾರ್ (52) ಅವರು ಇಂದು (ಮಂಗಳವಾರ) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶನಿವಾರ ರಾತ್ರಿ ಗೋಪಾಲ್ (29) ಎಂಬುವವರು ಚಲಾಯಿಸುತ್ತಿದ್ದ ಬೈಕ್, ಮೋಹನ್ ಕುಮಾರ್ ಅವರ ಸ್ಕೂಟರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಗೋಪಾಲ್ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ಅದೇ ವೇಳೆ ಬರುತ್ತಿದ್ದ ಟಿಪ್ಪರ್ ಲಾರಿಯ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಅಪಘಾತದಲ್ಲಿ ಮೋಹನ್ ಕುಮಾರ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ಮೂರು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮೋಹನ್ ಕುಮಾರ್ ಅವರು ಮಂಗಳವಾರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪಡವಿನಂಗಡಿಯಲ್ಲಿ ‘ನವ್ಯ ಸ್ಟುಡಿಯೋ’ (Navya Studio) ನಡೆಸುತ್ತಿದ್ದರು ಮತ್ತು ಕಪಿಟಾನಿಯೋ ನಿವಾಸಿಯಾಗಿದ್ದರು.
ಮಂಗಳೂರು ಸಂಚಾರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಒಂದೇ ಅಪಘಾತಕ್ಕೆ ಇಬ್ಬರು ಬಲಿಯಾಗಿರುವುದು ಸ್ಥಳೀಯರಲ್ಲಿ ಮತ್ತು ಮೃತರ ಕುಟುಂಬಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

