ಕುಂದಾಪುರ, ಏಪ್ರಿಲ್ 29 : ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆಂದು ಹೊರಟಿದ್ದರು. ಈ ಬಸ್ಸಿನಲ್ಲಿ 24 ವಿದ್ಯಾರ್ಥಿಗಳು ಮತ್ತು 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿ ಪ್ರಯಾಣಿಸುತ್ತಿದ್ದರು. ಇಂದು ಮುಂಜಾನೆ ಮುರುಡೇಶ್ವರದಿಂದ ಉಡುಪಿ ಕಡೆಗೆ ಬರುತ್ತಿದ್ದಾಗ, ತ್ರಾಸಿಯ ಮರವಂತೆ ಬೀಚ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಲಾರಿಗೆ ಸರಣಿ ಢಿಕ್ಕಿ ಹೊಡೆದಿದೆ.
ಈ ಭೀಕರ ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕುಂದಾಪುರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ. ಪ್ರವಾಸಿ ಬಸ್ ಚಾಲಕನ ಅತಿ ವೇಗ ಮತ್ತು ನಿಯಂತ್ರಣ ತಪ್ಪಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

