ಬೆಂಗಳೂರು : ಮೈಸೂರು ಜಿಲ್ಲೆಯ ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಶೇಷ ತನಿಖಾ ದಳ (SIT) ಸಲ್ಲಿಸಿರುವ ಆರೋಪ ಪಟ್ಟಿಯನ್ನು ರದ್ದುಗೊಳಿಸಬೇಕೆಂದು ಕೋರಿ ಎಚ್.ಡಿ. ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾ. ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿತು.
ರೇವಣ್ಣ ಪರ ವಕೀಲ ಬಿ.ಎಂ. ಗಿರೀಶ್ ಕುಮಾರ್ ಅವರು ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿ ಮೆಮೊ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿದೆ. ಅಲ್ಲದೆ, ಕಾನೂನಿನ ಅನ್ವಯ ಆಕ್ಷೇಪಾರ್ಹ ಆದೇಶದ ಕುರಿತು ಕ್ರಮಕೈಗೊಳ್ಳುವ ಸ್ವಾತಂತ್ರ್ಯವನ್ನು ಅರ್ಜಿದಾರರಿಗೆ ನೀಡಿ, ಪ್ರಕರಣವನ್ನು ಇತ್ಯರ್ಥಪಡಿಸಿದೆ.
2025ರ ಜನವರಿ 17 ರಂದು ರೇವಣ್ಣ ವಿರುದ್ಧದ ಆರೋಪ ನಿಗದಿಪಡಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ನಂತರದ ದಿನಗಳಲ್ಲಿ ವಿಚಾರಣೆಗೆ ನಿರಂತರವಾಗಿ ಕಾಲಾವಕಾಶ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ 2026ರ ಫೆಬ್ರವರಿ 5 ರಂದು ಹೈಕೋರ್ಟ್ ಈ ತಡೆಯಾಜ್ಞೆಯನ್ನು ತೆರವುಗೊಳಿಸಿತ್ತು. ಇದೀಗ ರೇವಣ್ಣ ಅವರು ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಈ ಅರ್ಜಿಯನ್ನೇ ಹಿಂಪಡೆದಿರುವುದು ಮಹತ್ವದ ಬೆಳವಣಿಗೆಯಾಗಿದೆ.

