ಪುಣೆ : ಪುಣೆಯ ಭೋರ್ ತಾಲೂಕಿನ ನಸ್ರಾಪುರದಲ್ಲಿ ಈ ಭೀಕರ ಘಟನೆ ನಡೆದಿದೆ. ಮಧ್ಯಾಹ್ನ ನಾಪತ್ತೆಯಾಗಿದ್ದ 4 ವರ್ಷದ ಬಾಲಕಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ, ಆಕೆಯ ರಕ್ತಸಿಕ್ತ ಹಾಗೂ ವಿರೂಪಗೊಂಡ ದೇಹ ಪತ್ತೆಯಾಗಿದೆ. 65 ವರ್ಷದ ವೃದ್ಧನೊಬ್ಬ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಕಲ್ಲೊಂದನ್ನು ಬಳಸಿ ತಲೆ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.
ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ವೃದ್ಧ ಆರೋಪಿಯು ಬಾಲಕಿಯನ್ನು ತನ್ನೊಂದಿಗೆ ಕರೆದೊಯ್ಯುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಈ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮೇಲೆ ನಡೆದ ಈ ಅಮಾನವೀಯ ಕೃತ್ಯವನ್ನು ಕೇಳಿ ಇಡೀ ಗ್ರಾಮವೇ ಬೆಚ್ಚಿಬಿದ್ದಿದ್ದು, ಆರೋಪಿಯ ಈ ಕ್ರೂರ ಮನಸ್ಥಿತಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಆರೋಪಿ ಪೊಲೀಸ್ ವಶದಲ್ಲಿದ್ದರೂ, ಗ್ರಾಮಸ್ಥರ ಆಕ್ರೋಶ ತಣ್ಣಗಾಗಿಲ್ಲ. ಶುಕ್ರವಾರ ಸಂಜೆ ಬಾಲಕಿಯ ಮೃತದೇಹವನ್ನು ಪೊಲೀಸ್ ಠಾಣೆಯ ಬಳಿ ತಂದಾಗ ಅಲ್ಲಿ ನೆರೆದಿದ್ದ ನೂರಾರು ಜನರು ಭಾವುಕರಾಗಿ ಕಣ್ಣೀರು ಹಾಕಿದರು. ಈ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಪುಣೆ-ಬೆಂಗಳೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ತಮಗೆ ತಕ್ಷಣವೇ ನ್ಯಾಯ ಸಿಗಬೇಕು ಮತ್ತು ಈ ರಾಕ್ಷಸನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್, “ಮುಂದಿನ 15 ದಿನಗಳಲ್ಲಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು (chargesheet) ಸಲ್ಲಿಸಲಾಗುವುದು ಮತ್ತು ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ (fast track court) ನಡೆಸಲಾಗುವುದು” ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಸಮಾಜ ಸೇವಕರು ಕೂಡ ನ್ಯಾಯ ವಿಳಂಬದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘಟನೆಗಳಿಗೆ ತ್ವರಿತ ನ್ಯಾಯ ಸಿಗುವುದು ಅತ್ಯಗತ್ಯ ಎಂದು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದಲ್ಲಿ ನಡೆದ ಮತ್ತೊಂದು ಬಾಲಕಿಯ ಕೊಲೆ ಪ್ರಕರಣದ ಜೊತೆಗೆ ಈ ಘಟನೆಯೂ ದೇಶಾದ್ಯಂತ ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

