ಕೊಪ್ಪಳ : ಕೊಪ್ಪಳ ನಗರದ ಮೊಬೈಲ್ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಮೀರ್ ಅಹಮ್ಮದ್ ಮೂಲಿಮನಿ (22) ಎಂಬ ಯುವಕನ ಮೇಲೆ ಮೇ 6ರಂದು ರಾತ್ರಿ ಹಲ್ಲೆ ನಡೆಸಲಾಗಿದೆ. ಸಮೀರ್ ತಾನು ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಹೋಟೆಲ್ನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದ ಕೆಲ ಯುವಕರು ಇಬ್ಬರ ಹೆಸರುಗಳನ್ನು ಕೇಳಿದ್ದಾರೆ. ಪ್ರೀತಿಯ ವಿಷಯ ತಿಳಿದ ತಕ್ಷಣ ಸಮೀರ್ ಮೇಲೆ ಹಲ್ಲೆ ಆರಂಭಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಲ್ಲೆ ನಡೆಸಿದ ತಂಡವು ಸಮೀರ್ನ ಕಣ್ಣಿಗೆ ಬಟ್ಟೆ ಕಟ್ಟಿ ಬೈಕ್ನಲ್ಲಿ ಹೊಸಪೇಟೆ ಕಡೆಯ ರಾಷ್ಟ್ರೀಯ ಹೆದ್ದಾರಿಗೆ ಕರೆದೊಯ್ದಿದ್ದಾರೆ. “ಹಿಂದೂ ಹುಡುಗಿಯನ್ನು ಪ್ರೀತಿಸುತ್ತೀಯಾ?” ಎಂದು ನಿಂದಿಸಿ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, “ಇನ್ನು ಮುಂದೆ ಆಕೆಯ ಜೊತೆ ಕಾಣಿಸಿಕೊಂಡರೆ ಜೀವಂತವಾಗಿ ಬಿಡುವುದಿಲ್ಲ” ಎಂದು ಮರಣಾಂತಿಕ ಬೆದರಿಕೆ ಹಾಕಿದ್ದಾರೆ. ನಂತರ ಆತನನ್ನು ಜಿಲ್ಲಾಸ್ಪತ್ರೆಯ ಸಮೀಪ ಬಿಟ್ಟು ಪರಾರಿಯಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಯುವತಿಯ ಸಹೋದರರಾದ ಆಶಿಷ್, ನೀಲೇಶ್ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

