ಮಂಗಳೂರು : ಮಂಗಳೂರು ನಗರದಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತಿರುವ ಕಾವೂರು ಪೊಲೀಸರು, ಕುಖ್ಯಾತ ಆರೋಪಿ ಇರ್ಷಾದ್ ಅಲಿಯಾಸ್ ಇರ್ಷಾ (26) ಎಂಬಾತನನ್ನು ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ಹಿಲರಿಯ ನಗರ ನಿವಾಸಿಯಾದ ಈತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಮತ್ತು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯು ಮೇ 13ರಂದು ನಡೆದಿದ್ದು, ಕಾವೂರು ಠಾಣಾ ವ್ಯಾಪ್ತಿಯ ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ ಬಳಿ ಆರೋಪಿಯು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ನಾಧರಿಸಿ ಪಣಂಬೂರು ಎಸಿಪಿ ತಂಡ ಹಾಗೂ ಕಾವೂರು ಪೊಲೀಸರು ಜಂಟಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಸುಮಾರು 3 ಕೆಜಿ 138 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇದರ ಅಂದಾಜು ಮೌಲ್ಯ ₹1,56,000 ಎಂದು ತಿಳಿಯಲಾಗಿದೆ.
ಬಂಧಿತ ಇರ್ಷಾದ್ ಹಳೆಯ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆಯೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ಆಯುಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಕರಾವಳಿ ಭದ್ರತಾ ಪೊಲೀಸ್ ಠಾಣೆಯಲ್ಲಿಯೂ ಈತನ ಮೇಲೆ ಮಾದಕ ವಸ್ತು ಮಾರಾಟದ ಪ್ರಕರಣವಿತ್ತು. ಪ್ರಸ್ತುತ ಕಾವೂರು ಪೊಲೀಸರು ಎನ್ಡಿಪಿಎಸ್ ಕಾಯ್ದೆಯಡಿ ಹೊಸ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.



