ಬೆಂಗಳೂರು : ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಡಾಮಂಡಲವಾಗಿದ್ದಾರೆ.ಯಾವುದೇ ಬೇಡಿಕೆ ಇಲ್ಲದಿದ್ದರೂ ಅತ್ಯಂತ ಶಾಂತಿ-ಸುವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿರುವುದು ಸರಿಯಲ್ಲ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಭೇದಭಾವ ಹುಟ್ಟುವಂತೆ ಮಾಡುವ ತುಷ್ಟೀಕರಣದ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರ ಈ ಆದೇಶ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನು ತಕ್ಷಣವೇ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗುವ ಆತಂಕ ಮತ್ತು ಭೇದಭಾವಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 1980ರ ಶಾಲಾ ಸಮವಸ್ತ್ರ ಕಾನೂನು ಅಡಿಯಲ್ಲಿ ನಾವು ಈ ಹಿಂದೆ ಸ್ಪಷ್ಟೀಕರಣ ಆದೇಶ ನೀಡಿದ್ದೆವು ಮತ್ತು ಅದನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು ಎಂದು ನೆನಪಿಸಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣದ ಬಗ್ಗೆ ವಿಭಜಿತ ತೀರ್ಪು ಬಂದು ಇನ್ನೂ ವಿಚಾರಣೆ ಬಾಕಿ ಇರುವಾಗಲೇ, ಸರ್ಕಾರವು ಮಕ್ಕಳಲ್ಲಿ ಮತ್ತೆ ಭೇದಭಾವದ ಆತಂಕ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಮತ್ತು ಸ್ಪಷ್ಟ ನೀತಿಯಿಲ್ಲದೆ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದು, ಅಂತಹ ಮೂಲಭೂತ ಸಮಸ್ಯೆಗಳನ್ನು ಮುಚ್ಚಿಹಾಕಲು ಈ ರೀತಿಯ ವಿವಾದಾತ್ಮಕ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಸೌದಿ ಅರೇಬಿಯಾ ಮತ್ತು ಇರಾನ್ನಂತಹ ದೇಶಗಳಲ್ಲೇ ಹೆಣ್ಣುಮಕ್ಕಳು ಹಿಜಾಬ್ ತೊರೆದು ತಮ್ಮ ನಿತ್ಯ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಮಾತ್ರ ಹೆಣ್ಣುಮಕ್ಕಳ ಹಿಂದುಳಿಕೆಯ ವಿಚಾರ ಮುಂದಿಟ್ಟುಕೊಂಡು ಕಾನೂನು ಮಾಡಿರುವುದು ಸೂಕ್ತವಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಸರ್ಕಾರದ ಈ ನಿರ್ಧಾರವು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಮತ್ತು ಇದು ಅತ್ಯಂತ ಬೇಜವಾಬ್ದಾರಿಯ ನಿರ್ಣಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : Madhu Bangarappa : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ; ಸಚಿವ ಮಧು ಬಂಗಾರಪ್ಪ ಘೋಷಣೆ!



