ಉಡುಪಿ : ಉಡುಪಿ ಜಿಲ್ಲೆಯ ನೇಜಾರುವಿನ ಜ್ಯೋತಿ ನಗರದ ಆರನೇ ಕ್ರಾಸ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆರನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ನೇಜಾರು ನಿವಾಸಿ 12 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.
ಸ್ಥಳೀಯ ಮೂಲಗಳ ಪ್ರಕಾರ, ಅಬ್ದುಲ್ ರೆಹಮಾನ್ ಎಂಬ ಬಾಲಕ ಜ್ಯೋತಿ ನಗರದ ಆರನೇ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಬಾಲಕನಿಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದನು ಎಂದು ತಿಳಿದುಬಂದಿದೆ.
ತಕ್ಷಣವೇ ಸ್ಥಳೀಯರು ಮತ್ತು ಸಾರ್ವಜನಿಕರ ಸಹಾಯದಿಂದ ಗಾಯಾಳು ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ಕೊಡಿಸಲಾಯಿತಾದರೂ, ತಲೆ ಹಾಗೂ ದೇಹದ ಒಳಭಾಗಕ್ಕೆ ತೀವ್ರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಮೃತ ಅಬ್ದುಲ್ ರೆಹಮಾನ್ ಸ್ಥಳೀಯ ಸಲಿಹಾತ್ ಶಿಕ್ಷಣ ಸಂಸ್ಥೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಅವನು ಶಾಲೆಯಲ್ಲಿ ಬಹಳ ಪ್ರತಿಭಾನ್ವಿತ ಮತ್ತು ಸೌಮ್ಯ ವಿದ್ಯಾರ್ಥಿಯಾಗಿದ್ದನೆಂದು ತಿಳಿದುಬಂದಿದೆ. ಬಾಲಕನ ಅಕಾಲಿಕ ಮರಣಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧನಾ ಸಿಬ್ಬಂದಿ ಮತ್ತು ಸಹ ವಿದ್ಯಾರ್ಥಿಗಳು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : Petrol Diesel Price Hike | ಪೆಟ್ರೋಲ್-ಡೀಸೆಲ್ ದರ ಏರಿಕೆ; ಸಿಎಂ ಸಿದ್ದರಾಮಯ್ಯ ಆಕ್ರೋಶ.



