ಕಾರ್ಕಳ :ಕಾರ್ಕಳ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್: ಪತ್ನಿ ಸೌಮ್ಯ ಶೆಟ್ಟಿ ಬಂಧನ; 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್!
ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಭಾನುವಾರ ಅವರ ಪತ್ನಿ ಸೌಮ್ಯ ಶೆಟ್ಟಿ (28) ಎಂಬುವವರನ್ನು ಬಂಧಿಸಿದ್ದಾರೆ. ಪತಿಯ ಸಾವಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣದ ಹಿನ್ನೆಲೆ: ಪುತ್ತೂರಿನ ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಹಾಗೂ ಪುತ್ತೂರಿನ ಉಪನೋಂದಣಾಧಿಕಾರಿ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಕಳೆದ ಫೆಬ್ರವರಿ 17 ರಂದು ನೋಂದಾಯಿತ ವಿವಾಹವಾಗಿದ್ದರು. ಮದುವೆಯ ನಂತರ ಈ ದಂಪತಿ ಕಾರ್ಕಳದ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಾಜೆಯಲ್ಲಿ ವಾಸವಾಗಿದ್ದರು.
ದೂರಿನಲ್ಲಿ ಏನಿದೆ?: ಮೃತ ಸುದೀಪ್ ರೈ ಅವರ ತಂದೆ ದಾಮೋದರ್ ರೈ ನೀಡಿದ ದೂರಿನ ಪ್ರಕಾರ, ಮಾರ್ಚ್ 17 ರಂದು ಸುದೀಪ್ ತನ್ನ ತಾಯಿಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆಂದು ನೆಲ್ಯಾಡಿಗೆ ತೆರಳುತ್ತಿದ್ದಾಗ, ಸೌಮ್ಯ ಸ್ಕೂಟರ್ನಲ್ಲಿ ಬಂದು ಕಾರನ್ನು ಅಡ್ಡಗಟ್ಟಿದ್ದರು. ಈ ವೇಳೆ ಸುದೀಪ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಘಟನೆಯಿಂದ ಮನನೊಂದ ಸುದೀಪ್ ರೈ ಮಾರ್ಚ್ 22 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 24 ರಂದು ಕೊನೆಯುಸಿರೆಳೆದಿದ್ದರು.
ಪೊಲೀಸ್ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ಸೂಚನೆಯಂತೆ ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್. ಅವರ ತಂಡ, ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಏಪ್ರಿಲ್ 11 ರಂದು ಸೌಮ್ಯ ಶೆಟ್ಟಿಯನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನು ಓದಿ : MANGALORE |ಮಂಗಳೂರು: ಗಿಫ್ಟ್ ಪಡೆದು ಕೈಕೊಟ್ಟ ಕಿಲಾಡಿ ಲವರ್: ಆಶಿಕ್ ಸಾವಿನ ಕೇಸ್ನಲ್ಲಿ ಪ್ರೇಯಸಿ ಸೇರಿ ಮೂವರ ವಿರುದ್ಧ FIR

