ಕೊಪ್ಪಳ : ಕೆಲವು ವರ್ಷಗಳ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ವೆಂಕಟೇಶ ಕುರುಬರ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣವನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ (Rarest of Rare) ಎಂದು ಪರಿಗಣಿಸಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಎಂಬ ಆರು ಮಂದಿ ಅಪರಾಧಿಗಳೆಂದು ಸಾಬೀತಾಗಿದ್ದು, ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ಅವರು ಇಂದು ಗಲ್ಲು ಶಿಕ್ಷೆ ಪ್ರಕಟಿಸಿದ್ದಾರೆ.
ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ವೆಂಕಟೇಶ ಕುರುಬರ್ ಅವರು ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಷ್ಟೇ ಅಲ್ಲದೆ, ಮಾರುತಿ ಚಿಕಿತ್ಸೆಯ ಸಮಯದಲ್ಲಿ ಕೊನೆಯವರೆಗೂ ವೆಂಕಟೇಶ ಅವರು ಬೆಂಬಲವಾಗಿ ನಿಂತಿದ್ದರು. ಈ ಕಾರಣದಿಂದಲೇ ಹಂತಕರು ವೆಂಕಟೇಶ ಅವರನ್ನು ಗುರಿಯಾಗಿಸಿಕೊಂಡು ಕೊಲೆಗೈದಿದ್ದರು ಎಂದು ನ್ಯಾಯಾಲಯ ಗಮನಿಸಿದೆ. ಸಭ್ಯ ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ನ್ಯಾಯಾಧೀಶರು ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ನ್ಯಾಯಾಲಯವು ಆರೋಪಿಗಳು ದೋಷಿ ಎಂದು ತೀರ್ಪು ನೀಡಿತ್ತು, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದ್ದಾರೆ.

