ನವದೆಹಲಿ : ದೆಹಲಿಯ ಜಂತರ್ ಮಂತರ್ನಲ್ಲಿ ಶನಿವಾರ ಕಾಕ್ರೋಚ್ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರು ಒಟ್ಟಾಗಿ ಬೃಹತ್ ಆಕ್ರೋಶ ಪ್ರದರ್ಶನ ನಡೆಸಿದರು. ದೇಶದ ಶಿಕ್ಷಣ ವ್ಯವಸ್ಥೆಯ ದುಸ್ಥಿತಿ ಹಾಗೂ ಯುವಕರ ಭವಿಷ್ಯದ ಹಿತದೃಷ್ಟಿಯಿಂದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಬಲವಾಗಿ ಒತ್ತಾಯಿಸಿದರು. “ನಾವು ಶಿಕ್ಷಣ ಸಚಿವರನ್ನು ಆಯ್ಕೆ ಮಾಡಿ ಕಳುಹಿಸಿದ್ದೇವೆ; ಅವರು ನಮ್ಮ ತೆರಿಗೆ ಹಣದಿಂದಲೇ ಸಂಬಳ ಪಡೆಯುತ್ತಾರೆ. ಆದರೆ ಅವರ ಅಧಿಕಾರಾವಧಿಯಲ್ಲಿ ಲಕ್ಷಾಂತರ ಯುವಕರ ಭವಿಷ್ಯವು ಕತ್ತಲೆಯಲ್ಲಿ ಮುಳುಗುವಂತಾಗಿದೆ” ಎಂದು ಪ್ರತಿಭಟನಾಕಾರರು ಆಕ್ರೋಶದ ನುಡಿಗಳನ್ನಾಡಿದ್ದಾರೆ. ಇದೇ ವೇಳೆ “ಕಾಕ್ರೋಚ್ ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ” ಎಂಬ ಘೋಷಣೆಗಳು ಜಂತರ್ ಮಂತರ್ನಲ್ಲಿ ಮೊಳಗಿವೆ.
ಈ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲೆಂದೇ ಅಮೆರಿಕದಿಂದ ಭಾರತಕ್ಕೆ ಆಗಮಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಜಂತರ್ ಮಂತರ್ ತಲುಪಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಪಕ್ಷದ ಬೆಂಬಲಿಗರು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಂತರ್ ಮಂತರ್ನತ್ತ ಧಾವಿಸಿ ಬರಬೇಕು ಹಾಗೂ ಯುವಕರ ಭವಿಷ್ಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅಭಿಜೀತ್ ದಿಪ್ಕೆ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ. ಸದ್ಯ ಜಂತರ್ ಮಂತರ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.



