Saturday, April 25, 2026
Homeತಾಜಾ ಸುದ್ದಿCP Radhakrishnan : ಭಯೋತ್ಪಾದನೆ ಮತ್ತು ಅದರ ವಿರುದ್ಧ ಹೋರಾಡುವವರ ನಡುವಿನ ವ್ಯತ್ಯಾಸವನ್ನು ಗುರುತಿಸುವಲ್ಲಿ...

CP Radhakrishnan : ಭಯೋತ್ಪಾದನೆ ಮತ್ತು ಅದರ ವಿರುದ್ಧ ಹೋರಾಡುವವರ ನಡುವಿನ ವ್ಯತ್ಯಾಸವನ್ನು ಗುರುತಿಸುವಲ್ಲಿ ಖರ್ಗೆ ವಿಫಲರಾಗಿದ್ದಾರೆ: ವಿ-ಪಿ ರಾಧಾಕೃಷ್ಣನ್

 ಬೀದರ್ : ಬೀದರ್ ಜಿಲ್ಲೆಯ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದ್ದೇವರು ಮಹಾಸ್ವಾಮೀಜಿಯವರ 75ನೇ ಜನ್ಮದಿನದ ‘ಅಮೃತ ಮಹೋತ್ಸವ’ ಸಂಭ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಖರ್ಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಅವರು, “ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಿಗೆ ಭಯೋತ್ಪಾದನೆ ಮತ್ತು ಅದನ್ನು ಎದುರಿಸುವವರ ನಡುವಿನ ವ್ಯತ್ಯಾಸವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ” ಎಂದು ಲೇವಡಿ ಮಾಡಿದರು.


ಖರ್ಗೆ ಅವರು ವೇದಿಕೆಯಲ್ಲಿದ್ದಾಗಲೇ ಮಾತನಾಡಿದ ಉಪರಾಷ್ಟ್ರಪತಿಗಳು, “ನನಗೂ ಖರ್ಗೆಯವರಿಗೂ ದೃಷ್ಟಿಕೋನದಲ್ಲಿ ಸಣ್ಣ ವ್ಯತ್ಯಾಸವಿದೆ. ಕೆಲವೊಮ್ಮೆ ಖರ್ಗೆ ಅವರಿಗೆ ಕಪ್ಪು ಮತ್ತು ಬಿಳಿ ನಡುವಿನ ವ್ಯತ್ಯಾಸ ತಿಳಿಯುವುದಿಲ್ಲ ಅಥವಾ ಭಯೋತ್ಪಾದಕ ಮತ್ತು ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ನಡುವೆ ವ್ಯತ್ಯಾಸ ಕಾಣುವುದಿಲ್ಲ ಎಂದು ನನಗೆ ಅನಿಸುತ್ತದೆ. ಉಳಿದಂತೆ ಅವರು ನನ್ನ ಆತ್ಮೀಯ ಸ್ನೇಹಿತರು” ಎಂದು ಮಾರ್ಮಿಕವಾಗಿ ನುಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ಉಪಸ್ಥಿತಿಯಲ್ಲೇ ಈ ಘಟನೆ ನಡೆದಿದೆ.

ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಎಡಿಎಂಕೆ ಮತ್ತು ಬಿಜೆಪಿಯ ಮೈತ್ರಿಯನ್ನು ಟೀಕಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದರು. “ಅಣ್ಣಾದೊರೈ ಫೋಟೋ ಹಾಕಿಕೊಳ್ಳುವ ಎಐಎಡಿಎಂಕೆ ನಾಯಕರು ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲದ ಮೋದಿಯವರೊಂದಿಗೆ ಹೇಗೆ ಕೈಜೋಡಿಸುತ್ತಾರೆ?” ಎಂದು ಪ್ರಶ್ನಿಸಿದ್ದರು. ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಖರ್ಗೆ, ತಾವು ಪ್ರಧಾನಿಯವರನ್ನು ವೈಯಕ್ತಿಕವಾಗಿ ಭಯೋತ್ಪಾದಕ ಎನ್ನಲಿಲ್ಲ, ಬದಲಿಗೆ ಅವರು ತನಿಖಾ ಸಂಸ್ಥೆಗಳ ಮೂಲಕ ವಿರೋಧ ಪಕ್ಷಗಳನ್ನು ‘ಭಯಭೀತಗೊಳಿಸುತ್ತಿದ್ದಾರೆ’ (Terrorising) ಎಂದು ಹೇಳಿದ್ದಾಗಿ ತಿಳಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!