ಬೆಂಗಳೂರು : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (D. Sudhakar) ಅವರ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಇದೀಗ ಶ್ವಾಸಕೋಶ ಸಂಬಂಧಿ ಕಾಯಿಲೆ (Lung Related Disease) ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ವೆಂಟಿಲೇಟರ್ ಅಡಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವ ಸುಧಾಕರ್ ಅವರು ಮೊಣಕಾಲು ಆಪರೇಷನ್ ಸಂಬಂಧ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಪರೇಷನ್ ಬಳಿಕ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಉಸಿರಾಟದ ತೊಂದರೆ ಎದುರಾಗಿತ್ತು. ಸೋಂಕು ಕಡಿಮೆಯಾಗದ ಕಾರಣ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು.
ಶ್ವಾಸಕೋಶದ ಸಮಸ್ಯೆಯಿಂದಾಗಿ ಉಸಿರಾಟಕ್ಕೆ ತೀವ್ರ ತೊಂದರೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ವೈದ್ಯರ ತಂಡವು ಸಚಿವರ ಆರೋಗ್ಯದ ಮೇಲೆ ನಿರಂತರವಾಗಿ ನಿಗಾ ವಹಿಸಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ವೈದ್ಯಕೀಯ ಬುಲೆಟಿನ್ ನಿರೀಕ್ಷಿಸಲಾಗುತ್ತಿದೆ.

