ಬೆಂಗಳೂರು : ಗಾಂಧಿನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ದೇಶದಲ್ಲಿ ಅಗತ್ಯ ವಸ್ತುಗಳು ಮತ್ತು ಅಡುಗೆ ಅನಿಲ ಸಿಲಿಂಡರ್ ದರಗಳು ಗಗನಕ್ಕೇರಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆದಾಯ ಪಾತಾಳಕ್ಕೆ ಕುಸಿದಿರುವಾಗ ಬೆಲೆ ಏರಿಕೆಯನ್ನು ತಡೆಯಲಾಗದ ಕೇಂದ್ರದ ವೈಫಲ್ಯವನ್ನು ಅವರು ಪ್ರಶ್ನಿಸಿದರು. ವಾಣಿಜ್ಯ ಸಿಲಿಂಡರ್ ದರ ಹೆಚ್ಚಳದಿಂದಾಗಿ ಅನೇಕ ಹೋಟೆಲ್ಗಳು ಬಾಗಿಲು ಮುಚ್ಚುವಂತಾಗಿದೆ, ಈ ಹೊರೆ ನೇರವಾಗಿ ಸಾಮಾನ್ಯ ಜನರ ಮೇಲೆ ಬೀಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಯುದ್ಧದ ಪರಿಸ್ಥಿತಿ ಇರುವ ಸಂದರ್ಭದಲ್ಲಿ ಮಿತ್ರ ರಾಷ್ಟ್ರಗಳೊಂದಿಗೆ ಬಾಂಧವ್ಯ ಉಳಿಸಿಕೊಳ್ಳುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ವಿದೇಶಾಂಗ ನೀತಿ ವಿಫಲವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ, ಅಲ್ಪಸಂಖ್ಯಾತರ ಪ್ರದೇಶ ಅಭಿವೃದ್ಧಿಗೆ ನೀಡಿದ ₹600 ಕೋಟಿ ಅನುದಾನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ₹18 ಸಾವಿರ ಕೋಟಿ ವೆಚ್ಚದಲ್ಲಿ ಬಿಡದಿ ಬಳಿ ಸ್ಯಾಟಲೈಟ್ ಟೌನ್ಶಿಪ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಆ ದೊಡ್ಡ ವಿಚಾರ ಬಿಟ್ಟು ಅನುದಾನದ ಬಗ್ಗೆ ಮಾತ್ರ ಯಾಕೆ ಚರ್ಚಿಸುತ್ತಿದ್ದೀರಿ?” ಎಂದು ಮಾಧ್ಯಮಗಳನ್ನು ಪ್ರಶ್ನಿಸಿದರು.

