ಕಡಬ, ಆಗಸ್ಟ್ 26 : ಕಡಬದ ಕೋಡಿಂಬಾಳ ನಿವಾಸಿ ಜಯಾನಂದ ಕೆ. (60) ಶಿಕ್ಷೆಗೆ ಗುರಿಯಾದ ದೋಷಿಯಾಗಿದ್ದಾನೆ. ಈತನ ವಿರುದ್ಧ ಕಡಬದಲ್ಲಿ ನಡೆದಿದ್ದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 06/2020 ರಂತೆ ಐಪಿಸಿ ಸೆಕ್ಷನ್ 354A, 509, 504, 506, 448, 307 ಹಾಗೂ 326A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪುತ್ತೂರು ಮಹಿಳಾ ಠಾಣಾ ಇನ್ಸ್ಪೆಕ್ಟರ್ ಕುಸುಮಧರ ಅವರು ತನಿಖೆ ನಡೆಸಿ, ಪ್ರಮುಖ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಐಪಿಸಿ ಸೆಕ್ಷನ್ 326A ಅಡಿಯಲ್ಲಿ ದೋಷಿ ಜಯಾನಂದನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 3 ಲಕ್ಷ ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗುತ್ತದೆ. ಜೊತೆಗೆ ಐಪಿಸಿ ಸೆಕ್ಷನ್ 504 ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ (ದಂಡ ಕಟ್ಟದಿದ್ದರೆ 3 ತಿಂಗಳು ಹೆಚ್ಚುವರಿ ಸಾದಾ ಸಜೆ) ವಿಧಿಸಲಾಗಿದೆ. ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರೀಶ್ಚಂದ್ರ ಉದ್ಯಾವರ, ಪ್ರಕಾಶ್ ಚಂದ್ರ ಶೆಟ್ಟಿ ಮತ್ತು ಜಯಂತಿ ಕೆ. ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.