ಕಡಬ : ಕುಮಾರಧಾರ ನದಿಯ ಪ್ರಬಲ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಶವವು ಸೋಮವಾರತಡರಾತ್ರಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತರನ್ನು ಮರ್ಧಾಳ ನಿವಾಸಿ ಮಂಜು ಎಂಬುವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡಿನಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನ ಮಾಡಲು ತೆರಳಿದ್ದರು. ಈಜು ತಿಳಿದಿದ್ದರೂ ಸಹ, ನೀರಿನ ತೀವ್ರ ಸೆಳೆತಕ್ಕೆ ಸಿಲುಕಿದ ರಕ್ಷಿತ್ ನದಿಯಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಅವರ ಸ್ನೇಹಿತರು ಮತ್ತು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸರು ಹಾಗೂ ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಶೋಧ ಕಾರ್ಯ ಆರಂಭಿಸಿದರು. ಕತ್ತಲೆಯ ಕಾರಣದಿಂದಾಗಿ ಶೋಧ ಕಾರ್ಯಕ್ಕೆ ಅಡಚಣೆ ಉಂಟಾಗಿತ್ತು. ನಂತರ ತಡರಾತ್ರಿ ಸ್ಥಳಕ್ಕೆ ಆಗಮಿಸಿದ ಈಶ್ವರ್ ಮಲ್ಪೆ ಮತ್ತು ಅವರ ತಂಡವು ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ರಕ್ಷಿತ್ ಅವರ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

