ಕುಂದಾಪುರ, ಏಪ್ರಿಲ್ 24: ಕುಂದಾಪುರ ತಾಲೂಕಿನ ಅಜ್ರಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಕಾಣಿಕೆ ಡಬ್ಬಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಂಕರನಾರಾಯಣ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಕಳುವಾದ ಸ್ವತ್ತು ಸೇರಿದಂತೆ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದೂರಿನ ಪ್ರಕಾರ, ಏಪ್ರಿಲ್ 20ರಂದು ಬೆಳಿಗ್ಗೆ ಸುಮಾರು 7.56ಕ್ಕೆ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಮೋಟಾರ್ ಸೈಕಲ್ನಲ್ಲಿ ದೇವಸ್ಥಾನದ ಆವರಣಕ್ಕೆ ಬಂದಿದ್ದನು. ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದಂತೆ, ಈತ ದೇವಸ್ಥಾನದ ಹೊರಗಿನ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿ ಸ್ಥಳದಿಂದ ಪರಾರಿಯಾಗಿದ್ದನು. ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಈ ತಂಡವು ತಾಂತ್ರಿಕ ಸಾಕ್ಷ್ಯಗಳನ್ನು ಬೆನ್ನಟ್ಟಿ ಹೋಗಿ, ಅಂತಿಮವಾಗಿ ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಯಿತು.
ಬಂಧಿತ ಆರೋಪಿಗಳನ್ನು ಕುಂದಾಪುರ ಕಮಲಶಿಲೆಯ ಮಠದಮನೆ ನಿವಾಸಿ ಸಂದೀಪ್ ಆಚಾರಿ (28) ಮತ್ತು ಕೊಪ್ಪಳ ಜಿಲ್ಲೆಯ ಕುಷ್ಟಗಿ ನಿವಾಸಿ ಮುತ್ತಪ್ಪ ಶರಣಪ್ಪ ವಾಲಿಖಾರ್ (40) ಎಂದು ಗುರುತಿಸಲಾಗಿದೆ. ಪೊಲೀಸರು ಇವರಿಂದ ಕೃತ್ಯಕ್ಕೆ ಬಳಸಿದ ಬೈಕ್, ಮೂರು ಮೊಬೈಲ್ ಫೋನ್ಗಳು ಮತ್ತು ದೇವಸ್ಥಾನದಿಂದ ಕದ್ದಿದ್ದ ಕಾಣಿಕೆ ಡಬ್ಬಿಯನ್ನು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

