ಕಾಪು :ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ; ಲಾರಿ-ಸ್ಕೂಟರ್ ನಡುವೆ ಡಿಕ್ಕಿ, ಸ್ಕೂಟರ್ ಸವಾರ ಸಾವು!
ಕಾಪು/ಉಡುಪಿ: ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಮೂಡಬೆಟ್ಟು ಗ್ರಾಮದ ಬೃಂದಾವನ ಹೋಟೆಲ್ ಬಳಿ ಸೋಮವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಏಪ್ರಿಲ್ 20ರ ಸಂಜೆ ಸುಮಾರು 4 ಗಂಟೆ ಸುಮಾರಿಗೆ ಸ್ಕೂಟರ್ ಸವಾರ ಭೀಮಪ್ಪ ಹುನ್ನಳ್ಳಿ ಮತ್ತು ಸಹ ಸವಾರ ಸಾಗರ್ ಅವರು ಉಡುಪಿಯಿಂದ ಕಾಪುವಿನತ್ತ ತೆರಳುತ್ತಿದ್ದರು. ಇದೇ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಅತಿ ವೇಗವಾಗಿ ಬಂದ ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಸ್ಕೂಟರ್ಗೆ ಹಿಂದಿನಿಂದ ಭೀಕರವಾಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರಿಬ್ಬರು ರಸ್ತೆಯ ಡಿವೈಡರ್ಗೆ ತಾಗಿ ಕೆಳಕ್ಕೆ ಬಿದ್ದಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ಸಾವು: ಘಟನೆ ನಡೆದ ತಕ್ಷಣ ಸ್ಥಳೀಯ ನಿವಾಸಿ ಸಂದೀಪ್ ಆಚಾರ್ಯ ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಭೀಮಪ್ಪ ಹುನ್ನಳ್ಳಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಗಾಯಾಳು ಸಾಗರ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

