HomeLOCALMangaluru : ಗಾಂಜಾ ಮತ್ತು ಹಣಕಾಸಿನ ಕಿರಿಕ್; ಬಂದರು ಠಾಣಾ ವ್ಯಾಪ್ತಿಯಲ್ಲಿ ತಲವಾರ್ ಹಿಡಿದು ನೆರೆಹೊರೆಯವರ...

Mangaluru : ಗಾಂಜಾ ಮತ್ತು ಹಣಕಾಸಿನ ಕಿರಿಕ್; ಬಂದರು ಠಾಣಾ ವ್ಯಾಪ್ತಿಯಲ್ಲಿ ತಲವಾರ್ ಹಿಡಿದು ನೆರೆಹೊರೆಯವರ ಮಾರಾಮಾರಿ!

ಮಂಗಳೂರು : ಮಂಗಳೂರು ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಬಜಿಲಕರಿಯ ಎಂಬಲ್ಲಿ ನೆರೆಹೊರೆಯವರ ನಡುವೆ ಭೀಕರ ಮಾರಾಮಾರಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಈ ವಿವಾದವು ತಾರಕಕ್ಕೇರಿದ್ದು, ಗುಂಪುಗಳು ತಲವಾರ್ ಮತ್ತು ದೊಣ್ಣೆಗಳನ್ನು ಹಿಡಿದು ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ಘಟನೆಯು ಹಾಡಹಗಲೇ ಸಾರ್ವಜನಿಕವಾಗಿ ನಡೆದಿದ್ದು, ಗಾಂಜಾ ವಹಿವಾಟು ಮತ್ತು ಹಣಕಾಸಿನ ವಿಚಾರದಲ್ಲಿ ಬೆಳೆದುಬಂದ ವೈರತ್ವವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.


ಈ ಸಂಘರ್ಷದಲ್ಲಿ ಓರ್ವ ಮಹಿಳೆ ಸೇರಿದಂತೆ ಒಟ್ಟು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕರ ಗುಂಪು ಪರಸ್ಪರ ಕಲ್ಲು ಎಸೆಯುತ್ತಾ, ಮಾರಕಾಸ್ತ್ರಗಳನ್ನು ಹಿಡಿದು ಬೀದಿಯಲ್ಲಿ ಅಟ್ಟಹಾಸ ಮೆರೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಎರಡೂ ಕುಟುಂಬದವರು ಪರಸ್ಪರ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಂದರು ಪೊಲೀಸರು ಈಗ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅನಿತಾ ಎಂಬವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ ಮತ್ತು ಜಿತೇಶ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಅದೇ ರೀತಿ ಸುನಿತಾ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ತೇಜಸ್, ಲೋಕೇಶ್ ಮತ್ತು ಅನಿತಾ ಎಂಬುವವರ ವಿರುದ್ಧ ಬಿಎನ್‌ಎಸ್ (BNS) ಸೆಕ್ಷನ್ 115 (2), 118 (1) ಮತ್ತು 351 (3) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments