ಮಂಗಳೂರು: ಮುಲ್ಕಿ ಸಮೀಪದ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಭಾರಿ ಕಳವು ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, 4 ಕುಖ್ಯಾತ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಡುಬಿದ್ರೆಯ ಹೆಜಮಾಡಿ ನಿವಾಸಿ ಜಾಹೀದ್ ಸಿನಾನ್ (36), ಕಾರ್ಕಳದ ನಿಟ್ಟೆ ನಿವಾಸಿ ಯಾಸೀನ್ (36), ದಾವಣಗೆರೆಯ ಮಹಮದ್ ಅಫ್ರಿದಿ (26) ಮತ್ತು ಎಸ್. ಕೆ. ಅಬ್ದುಲ್ ಜುಮ್ಮಾನ್ (26) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಸೆಪ್ಟೆಂಬರ್ 1ರ ಮಧ್ಯರಾತ್ರಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ಬಾಗಿಲ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ದೈವದ ಮೌಲ್ಯಯುತ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ದೂರು ದಾಖಲಾಗಿತ್ತು.
ವಿಶೇಷ ತನಿಖಾ ಪಡೆ ರಚಿಸಿದ ಪೊಲೀಸರು, ಸೆಪ್ಟೆಂಬರ್ 6ರಂದು ಮುಲ್ಕಿಯ ಕಾರ್ನಾಡು ಬಳಿ ಜಾಹೀದ್ ಸಿನಾನ್ ಹಾಗೂ ಯಾಸೀನ್ನನ್ನು ವಶಕ್ಕೆ ಪಡೆದಿದ್ದರು. ಅವರ ಸುಳಿವಿನಂತೆ ದಾವಣಗೆರೆಯಲ್ಲಿ ಸೆಪ್ಟೆಂಬರ್ 7ರಂದು ಇನ್ನಿಬ್ಬರು ಆರೋಪಿಗಳಾದ ಮಹಮದ್ ಅಫ್ರಿದಿ ಹಾಗೂ ಎಸ್. ಕೆ. ಅಬ್ದುಲ್ ಜುಮ್ಮಾನ್ನನ್ನು ಬಂಧಿಸಲಾಯಿತು.
ಬಂಧಿತ ಆರೋಪಿಗಳಿಂದ ಸುಮಾರು 4.521 ಕೆಜಿ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನಾಭರಣ (ಮೌಲ್ಯ ₹11.20 ಲಕ್ಷ) ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಬೈಕ್ (ಮೌಲ್ಯ ₹6 ಲಕ್ಷ) ಸೇರಿ ಒಟ್ಟು ₹17.20 ಲಕ್ಷ ಮೌಲ್ಯದ ಸ್ವತ್ತುಗಳನ್ನುವಶಪಡಿಸಿಕೊಳ್ಳಲಾಗಿದೆ.
ಈ ಬಂಧನದಿಂದ ಉಳ್ಳಾಲ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣಗಳೂ ಪತ್ತೆಯಾಗಿವೆ. ಬಂಧಿತ ಪ್ರಮುಖ ಆರೋಪಿ ಜಾಹೀದ್ ಸಿನಾನ್ ವಿರುದ್ಧ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 18 ಹಳೆಯ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.