ಮಣಿಪಾಲ : ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕಾರ್ಕಳ ಇನ್ನಾ ಗ್ರಾಮದ ತೋಡಿಕಮಾರ್ ನಿವಾಸಿ ಕೆ.ಗೋವಿಂದ ರಾಜ್ (40) ಹಾಗೂ ವಿಜಯಪುರ ಮೂಲದ ಕಲ್ಯಾ ಹಾಳಕಟ್ಟೆ ನಿವಾಸಿ ಶೇಖಪ್ಪ ಛಲವಾದಿ (28) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 5ರಂದು ಮರ್ಣೆ ಗ್ರಾಮದ ಕುಕ್ಕಿಪಳ್ಳೆ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಮುನ್ಸೂಚನೆ ಅಥವಾ ಅನುಮತಿ ಪಡೆಯದೇ, ಅನಧಿಕೃತವಾಗಿ ಅಪಾಯಕಾರಿ ಸ್ಫೋಟಕ ವಸ್ತುಗಳನ್ನು ಬಳಸಿ ಬಂಡೆ ಕಲ್ಲನ್ನು ಸ್ಫೋಟಿಸಲಾಗಿತ್ತು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ತನಿಖೆ ಹಾಗೂ ಜಪ್ತಿ: ಪ್ರಕರಣದ ಗಾಂಭೀರ್ಯತೆಯನ್ನು ಅರಿತು ತನಿಖೆ ಕೈಗೆತ್ತಿಕೊಂಡ ಮಣಿಪಾಲ ಠಾಣೆಯ ಎಸ್ಐ (SI) ತಿಮ್ಮೇಶ್ ಬಿ.ಎನ್. ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಕೃತ್ಯಕ್ಕೆ ಬಳಸಿದ್ದ ಟ್ರ್ಯಾಕ್ಟರ್, ಡ್ರಿಲ್ಲಿಂಗ್ ಮೆಷಿನ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.