ಮೂಡುಬಿದಿರೆ: ಸ್ಥಳೀಯ ಕೆಫೆಯೊಂದರಲ್ಲಿ ಉಪಹಾರ ಸೇವಿಸುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ಗಿರಿ (Moral Policing) ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ಕಾಂಗ್ರೆಸ್ ಮುಖಂಡ ಹಾಗೂ ಸಂಘ ಪರಿವಾರದ ಇಬ್ಬರು ಕಾರ್ಯಕರ್ತರ ವಿರುದ್ಧ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಆಪ್ತ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವ ರಿತಿಲ್ ಪೂಜಾರಿ, ಸಂಘ ಪರಿವಾರದ ಕಾರ್ಯಕರ್ತ ಪ್ರೇಮ್ ಭಂಡಾರಿ ಮತ್ತು ಬಜರಂಗದಳದ ಮಾಜಿ ಸಂಚಾಲಕ ಸಂಜಯ್ ಹೆಗ್ಡೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆಯ ಖಾಸಗಿ ಕಾಲೇಜಿನ ಬೇರೆ ಬೇರೆ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಬಸ್ ನಿಲ್ದಾಣದ ಸಮೀಪವಿರುವ ಕೆಫೆಗೆ ಉಪಹಾರಕ್ಕಾಗಿ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ನುಗ್ಗಿದ ಮೂವರು ಆರೋಪಿಗಳು ವಿದ್ಯಾರ್ಥಿಗಳ ಹೆಸರುಗಳನ್ನು ಕೇಳಿ, ನಿಂದಿಸಿ ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ಘಟನೆಯಿಂದ ಭೀತಿಗೊಳಗಾದ ವಿದ್ಯಾರ್ಥಿಗಳು ದೂರು ನೀಡಲು ನಿರಾಕರಿಸಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮೂಡುಬಿದಿರೆ ಪಿಎಸ್ಐ ಪ್ರತಿಭಾ ಅವರು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಮ್ಮ ಸ್ವಂತ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 126(2), 352, 351(2) ಜೊತೆಗೆ 3(5) ರ ಅಡಿಯಲ್ಲಿ ಸುಮೋಟೊ ಎಫ್ಐಆರ್ ದಾಖಲಿಸಿದ್ದಾರೆ.
ಆರೋಪಿಗಳಾದ ಪ್ರೇಮ್ ಭಂಡಾರಿ ಮತ್ತು ಸಂಜಯ್ ಹೆಗ್ಡೆ ವಿರುದ್ಧ ಈ ಹಿಂದೆಯೂ ಮೂಡುಬಿದಿರೆ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಇಬ್ಬರ ಮೇಲೂ ಈ ಹಿಂದೆ ರೌಡಿಶೀಟ್ ತೆರೆಯಲಾಗಿತ್ತು. ಪ್ರಸ್ತುತ ಅವರ ರೌಡಿಶೀಟ್ ಬಾಂಡ್ ಅವಧಿ ಮುಕ್ತಾಯಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.