ಚಿಕ್ಕಮಗಳೂರು : ಜಿ. ಹೊಸಳ್ಳಿ ಗ್ರಾಮದ ನಿವಾಸಿ ಗುರುವಮ್ಮ (45) ಎಂಬುವವರು ಇಂದು ಬೆಳಿಗ್ಗೆ ಎಂದಿನಂತೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆಯೊಂದು ಏಕಾಏಕಿ ಅವರ ಮೇಲೆರಗಿದೆ. ಆನೆಯ ದಾಳಿಯಿಂದಾಗಿ ಗುರುವಮ್ಮ ಅವರು ಗಾಯಗೊಂಡಿದ್ದು, ಘಟನೆ ನಡೆದ ತಕ್ಷಣ ಸ್ಥಳೀಯರು ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಎರಡು ಕಾಡಾನೆಗಳು ಬೀಡುಬಿಟ್ಟಿದ್ದು, ಸುತ್ತಮುತ್ತಲ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಸಿವೆ. ಇದರಿಂದಾಗಿ ರೈತರು ಹಾಗೂ ಕಾರ್ಮಿಕರು ತೋಟಕ್ಕೆ ಹೋಗಲು ಭಯಪಡುವಂತಾಗಿದ್ದು, ಸಾಮಾನ್ಯ ಜೀವನ ಅಸ್ತವ್ಯಸ್ತಗೊಂಡಿದೆ. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲೆನಾಡಿನ ಈ ಭಾಗದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಮಿತಿಮೀರುತ್ತಿದ್ದು, ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಕೂಡಲೇ ಅರಣ್ಯ ಇಲಾಖೆಯು ಈ ಆನೆಗಳನ್ನು ಸ್ಥಳಾಂತರಿಸಬೇಕು ಅಥವಾ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬೆಳೆ ಹಾನಿ ಮತ್ತು ಜೀವ ಭಯದ ನಡುವೆ ಬದುಕುತ್ತಿರುವ ಇಲ್ಲಿನ ಜನರಿಗೆ ಶಾಶ್ವತ ಪರಿಹಾರ ಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.

